ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ನ 7ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ದಿಸಲು ಬಿಜೆಪಿಯ ಅಭ್ಯರ್ಥಿಯಾಗಿ ಬೆಳ್ತಂಗಡಿಯ ನ್ಯಾಯವಾದಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಅಧ್ಯಕ್ಷ ಪ್ರತಾಪ್ ಸಿಂಹ ನಾಯಕ್ ಜೂನ್ 18ರಂದು ವಿಧಾನಸೌಧದಲ್ಲಿ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ಚುನಾವಣಾಧಿಕಾರಿ ವಿಶಾಲಾಕ್ಷಿಯವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಅರವಿಂದ ಲಿಂಬಾವಳಿ ಮತ್ತಿತರರು ಹಾಜರಿದ್ದರು.
ವಿಧಾನಸಭೆಯ ಸಂಖ್ಯಾಬಲದಂತೆ ವಿಧಾನ ಪರಿಷತ್ತಿನ 7ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಗೆ 4ಸ್ಥಾನಗಳನ್ನು ಗೆಲುವು ಸಾಧಿಸುವ ಸಾಧ್ಯತೆಯಿದ್ದು; ಬಿಜೆಪಿಯಿಂದ ನ್ಯಾಯವಾದಿ ಬೆಳ್ತಂಗಡಿಯ ಪ್ರತಾಪಸಿಂಹ ನಾಯಕ್, ಮಾಜಿ ಸಚಿವರಾದ ಎಂ. ಟಿ. ಬಿ. ನಾಗರಾಜ್, ಶಂಕರ್ ಹಾಗೂ ಸುನಿಲ್ ವಯ್ಯಾಪುರೆ ಅಭ್ಯರ್ಥಿಗಳಾಗಿದ್ದಾರೆ. ಕಾಂಗ್ರೇಸ್ ಪಕ್ಷ ಇಬ್ಬರು ಅಭ್ಯರ್ಥಿಗಳನ್ನು ಗೆಲ್ಲಿಸುವ ಸಂಖ್ಯಾಬಲವನ್ನು ವಿಧಾನಸಭೆಯಲ್ಲಿ ಹೊಂದಿದ್ದು, ಹಾಲಿ ಸದಸ್ಯನಸೀರ್ ಅಹಮ್ಮದ್ ಹಾಗೂ ರಾಜ್ಯಸಭೆಯ ಮಾಜಿ ಸದಸ್ಯ ಬಿ. ಕೆ. ಹರಿಪ್ರಸಾದ್ರನ್ನು ಕಣಕ್ಕಿಳಿಸಿದೆ. ಒಂದು ಸ್ಥಾನ ಗೆಲ್ಲುವಷ್ಟು ಸಂಖ್ಯಾಬಲ ಹೊಂದಿದ ಜೆಡಿಎಸ್ ಪಕ್ಷದಿಂದ ಕೋಲಾರದ ಗೋವಿಂದರಾಜು ಕಣಕ್ಕಿಳಿಯಲಿದ್ದು, ಎಲ್ಲವ 7ಮಂದಿ ಅಭ್ಯರ್ಥಿಗಳೂ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.







