ಬೆಳ್ತಂಗಡಿ: ಮೈಸೂರು ರಾಜ್ಯ ಕರ್ನಾಟಕವೆಂದು ನಾಮಕರಣಗೊಂಡ 50ನೇ ವರ್ಷ ಸುವರ್ಣ ಕರ್ನಾಟಕ ಸಂಭ್ರಮವೆಂಬ ಪ್ರಯುಕ್ತ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಿದ್ಧಪಡಿಸಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಸುವರ್ಣ ಸಂಭ್ರಮ ರಥಯಾತ್ರೆ ಸೆಪ್ಟೆಂಬರ್ 28ರಂದು ದಕ್ಷಿಣ ಜಿಲ್ಲೆಯನ್ನು ಪ್ರವೇಶಿಸುವ ಸಂದರ್ಭದಲ್ಲಿ ಉಜಿರೆಯ ಮುಖ್ಯ ವೃತ್ತದಲ್ಲಿ ಭವ್ಯ ಸ್ವಾಗತ ಕೋರಲಾಯಿತು. ಬೆಳ್ತಂಗಡಿ ತಹಶೀಲ್ದಾರ್ ಪ್ರಥ್ವಿ ಸಾನಿಕಮ್ ರಥದಲ್ಲಿ ಅಳವಡಿಸಲಾದ ಭವ್ಯ ಭುವನೇಶ್ವರಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ರಥವನ್ನು ಜಿಲ್ಲೆಗೆ ಬರಮಾಡಿಕೊಂಡರು. ಚಿಕ್ಕಮಗಳೂರು ಜಿಲ್ಲೆಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ರಥಯಾತ್ರೆಯ ನೇತೃತ್ವವನ್ನು ಬೆಳ್ತಂಗಡಿಯ ತಹಶೀಲ್ದಾರ್ ಅವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ., ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಶ್ರೀನಾಥ್ ಎಂ.ಪಿ., ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಯದುಪತಿ ಗೌಡ ಕನ್ನಡ ತಾಯಿ ಭುವನೇಶ್ವರಿ ಪ್ರತಿಮೆಗೆ ಮಾಲಾರ್ಪಣೆಗೈದು ಗೌರವ ಸಲ್ಲಿಸಿದರು. ಬೆಳ್ತಂಗಡಿ ತಾಲೂಕು ಕಂದಾಯ ನಿರೀಕ್ಷಕ ಪ್ರತೀಶ್ ಎಚ್. ಆರ್., ವೇಣೂರು ಕಂದಾಯ ನಿರೀಕ್ಷಕ ಕುಮಾರಸ್ವಾಮಿ, ಮಿತ್ತಬಾಗಿಲು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ ಬಂಗೇರ, ಉಜಿರೆಯ ಕೈಗಾರಿಕೋದ್ಯಮ ಮತ್ತು ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್, ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ ಮತ್ತು ಉಜಿರೆಯ ನಾಗರಿಕರು, ಸಾರ್ವಜನಿಕರು ಉಪಸ್ಥಿತರಿದ್ದರು. ರಥಯಾತ್ರೆಯಲ್ಲಿ ರಾಜ್ಯದ ಕಲೆ-ಜನಪದ ಸಂಸ್ಕೃತಿಯನ್ನು ಬಿಂಬಿಸುವ ಪ್ರತಿಕೃತಿಗಳನ್ನು ಅಳವಡಿಸಲಾಗಿತ್ತು. ಕಲಾವಿದರು ತಮಟೆ ಬಾರಿಸುವ ಮೂಲಕ ರಥಯಾತ್ರೆಯನ್ನು ಸ್ವಾಗತಿಸಿದರು. ರಥಯಾತ್ರೆ ಸೆಪ್ಟೆಂಬರ್ 28ರಂದು ಬೆಳ್ತಂಗಡಿಯಲ್ಲಿ ವಾಸ್ತವ್ಯವಿದ್ದು; ಸೆಪ್ಟೆಂಬರ್ 29ರಂದು ಮಂಗಳೂರಿನತ್ತ ನಿರ್ಗಮಿಸಿತು.






