ಬೆಳ್ತಂಗಡಿ: ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದು 112 ವರ್ಷಗಳ ಇತಿಹಾಸವುಳ್ಳ ಪ್ರತಿಷ್ಠಿತ ಬ್ಯಾಂಕ್ ಆಗಿದ್ದು; ರಾಜ್ಯದ 18 ಜಿಲ್ಲೆಗಳಲ್ಲಿ ಪ್ರಸ್ತುತ 16 ಶಾಖೆಗಳನ್ನು, 25,000ಕ್ಕಿಂತಲೂ ಹೆಚ್ಚು ಸದಸ್ಯರನ್ನು ಹೊಂದಿರುವ ಪ್ರತಿಷ್ಠಿತ ಬ್ಯಾಂಕ್ ಆಗಿದ್ದು; ರಾಷ್ಟ್ರ, ರಾಜ್ಯ ಹಾಗೂ ಜಿಲ್ಲಾ ಮಟ್ಟದ ಹಲವಾರು ಪ್ರಶಸ್ತಿಗಳನ್ನು ಪಡೆದಿರುವ ಬ್ಯಾಂಕ್ ಆಗಿರುತ್ತದೆ. ಈ ಬ್ಯಾಂಕಿನ ಉಪಾಧ್ಯಕ್ಷರಾಗಿ ಬೆಳ್ತಂಗಡಿ ತಾಲೂಕಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಪೂಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದ ಸಮಾಜ ವಿಜ್ಞಾನ ಶಿಕ್ಷಕರಾದ ಧರಣೇಂದ್ರ ಕೆ. ಇವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ ಎಂದು ಬ್ಯಾಂಕಿನ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಧರಣೇಂದ್ರ ಕೆ.ಯವರು ಒಬ್ಬ ಅತ್ಯುತ್ತಮ ಕಾರ್ಯಕ್ರಮ ನಿರೂಪಕನಾಗಿ, ಅಸಾಮಾನ್ಯ ಸಂಘಟನಾಗಿ, ಜಿಲ್ಲೆ ಹಾಗೂ ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಗುರುತಿಸಿಕೊಂಡವರು. ಸಾಮಾಜಿಕ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಸೈ ಎನಿಸಿಕೊಂಡವರು. ಮಡಂತ್ಯಾರು ಜೆಸಿಐನ ಅಧ್ಯಕ್ಷರಾಗಿ, ಅಂತರಾಷ್ಟ್ರೀಯ ಲಯನ್ ಸೇವಾ ಸಂಸ್ಥೆಯ ಬೆಳ್ತಂಗಡಿಯ ಅಧ್ಯಕ್ಷರಾಗಿ, ವಲಯಾಧ್ಯಕ್ಷ, ಪ್ರಾಂತ್ಯಾಧ್ಯಕ್ಷರಾಗಿ ಲಯನ್ಸ್ ಜಿಲ್ಲಾ ಸಂಪುಟದಲ್ಲಿ ವಿವಿಧ ಹುದ್ದೆಗಳಲ್ಲಿ ತೊಡಗಿಸಿಕೊಂಡು ಸಾಧಕರಾದವರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಮಡಂತ್ಯಾರು ಸಂಸ್ಥೆಯ ಜೊತೆ ಕಾರ್ಯದರ್ಶಿಯಾಗಿ, ಬೆಳ್ತಂಗಡಿ ತಾಲೂಕು ಸರಕಾರಿ ನೌಕರ ಸಂಘದ ಪದಾಧಿಕಾರಿಯಾಗಿ, ರಾಜ್ಯ ಪರಿಷತ್ತು ಸದಸ್ಯರಾಗಿ, ಬೆಳ್ತಂಗಡಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಹೀಗೆ ಹಲವಾರು ಸಂಸ್ಥೆಗಳಲ್ಲಿ ತೊಡಗಿಸಿಕೊಂಡು ಆ ಹುದ್ದೆಗೆ ನ್ಯಾಯವನ್ನು ಒದಗಿಸಿಕೊಟ್ಟು ಎಲ್ಲರ ಮೆಚ್ಚುಗೆಗೆ ಪಾತ್ರರಾದವರು.







