ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಜನರ ಬಹುದಿನದ ಬೇಡಿಕೆಯಾಗಿದ್ದ ಗುರುವಾಯನಕೆರೆಯಿಂದ ಉಪ್ಪಿನಂಗಡಿವರೆಗಿನ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ರಾಜ್ಯ ಸರ್ಕಾರ 13 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದು; ಇದಕ್ಕಾಗಿ ಖುದ್ದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಸಮಸ್ಯೆ ಕುರಿತು ಮನವರಿಕೆ ಮಾಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸದ್ರಿ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸುವಂತೆ ಒತ್ತಾಯಿಸುವ ಮೂಲಕ ಜನತೆಯ ಸಂಕಷ್ಟ ನೀಗಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರ ಕಾರ್ಯ ಅಭಿನಂದನಾರ್ಹ. ಬೆಂಗಳೂರಿನಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸದ್ರಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆಯನ್ನು ರಾಜ್ಯ ಸರಕಾರ ನೀಡಿದೆ. ದೀರ್ಘಕಾಲದ ಬೇಡಿಕೆಯನ್ನು ಈಡೇರಿಸಿದ್ದಕ್ಕಾಗಿ ರಾಜ್ಯ ಸರ್ಕಾರಕ್ಕೆ, ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯರವರಿಗೆ, ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ ಹಾಗೂ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರಿಗೆ ಅಭಿನಂದನೆಗಳು. ಈ ಹಿಂದೆ ಲೋಕೋಪಯೋಗಿ ಸಚಿವರು ಪುತ್ತೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಇದೇ ರಸ್ತೆಯಲ್ಲಿ ಕರೆದುಕೊಂಡು ಬಂದು ರಸ್ತೆಯ ವಾಸ್ತವ ಪರಿಸ್ಥಿತಿಯ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿ, ರಸ್ತೆ ಅಭಿವೃದ್ಧಿಯ ಅಗತ್ಯತೆ ಬಗ್ಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ರಕ್ಷಿತ್ ಶಿವರಾಂ ಮನವಿ ಮಾಡಿದ್ದರು. ಈ ಮೂಲಕ ಈ ರಸ್ತೆಯ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ರಾಜ್ಯ ಹೆದ್ದಾರಿ ಬೆಂಗಳೂರು ಹಾಗೂ ಜಿಲ್ಲಾ ಕೇಂದ್ರ, ಧರ್ಮಸ್ಥಳ, ವೇಣೂರು, ಉಪ್ಪಿನಂಗಡಿ, ಪುತ್ತೂರು ಮೊದಲಾದ ಕಡೆ ಸಂಪರ್ಕ ಕಲ್ಪಿಸುವ ಹೆದ್ದಾರಿಯಾಗಿದ್ದು; ಕಾಮಗಾರಿಯ ಅನುಮೋದನೆ ಸಹಕರಿಸಿದ ಎಲ್ಲರಿಗೂ ಜಿಲ್ಲಾ ಕೆಡಿಪಿ ಸದಸ್ಯರಾದ ನ್ಯಾಯವಾದಿ ಸಂತೋಷ್ ಕುಮಾರ್ ಲಾಯ್ಲ ಅವರು ಅಭಿನಂದನೆ ಸಲ್ಲಿಸಿದ್ದಾರೆ.






