ಬೆಳ್ತಂಗಡಿ: ಕೋವಿಡ್ ವಿರುದ್ಧ ಹೋರಾಟದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗಣನೀಯವಾದ ಸೇವೆ ನೀಡುತ್ತಿದ್ದು, ತನ್ನ ಗ್ರಾಮಾಭಿವೃದ್ಧಿ ಯೋಜನೆ ಕೇಂದ್ರದ ಮೂಲಕ ಸೋಂಕಿತರ ಚಿಕಿತ್ಸೆಗಾಗಿ ಕೋವಿಡ್ ಕೇರ್ ಸೆಂಟರ್ ಹಾಗೂ ವಾಹನ ಸೇವೆಯನ್ನು ಈಗಾಗಲೇ ನೀಡಿದೆ. ಇದೀಗ ಮತ್ತೊಂದು ಹೆಜ್ಜೆ ಮುಂದೆ ಬಂದು ಸಾಮಾಜಿಕ ಕಳಕಳಿ ಮೆರೆದಿದ್ದು, ಆರೋಗ್ಯ ಬಿಕ್ಕಟ್ಟು ಎದುರಾಗಿರುವ ಇಂತಹ ಸಂದರ್ಭದಲ್ಲಿ ಗರ್ಭಿಣಿಯರ ಆರೋಗ್ಯ ಸಂರಕ್ಷಣೆಗಾಗಿ ಕಾರ್ಯನಿರ್ವಹಿಸಲು ಮುಂದಾಗಿದೆ. ಸದ್ಯ ಸರ್ಕಾರಿ ಆಸ್ಪತ್ರೆಗಳನ್ನು ಕೋವಿಡ್ ಸೋಂಕಿತರ ಶುಶ್ರೂಷೆಗಾಗಿ ಮೀಸಲಿಟ್ಟಿದ್ದು, ಇಲ್ಲಿ ಸೋಂಕು ಹರಡುವ ಸಾಧ್ಯತೆಗಳು ಹೆಚ್ಚಿರುತ್ತದೆ. ಈ ನಿಟ್ಟಿನಲ್ಲಿ ಗರ್ಭಿಣಿಯರ ಚಿಕಿತ್ಸೆ ಹಾಗೂ ಹೆರಿಗೆಗೆ ಸಮಸ್ಯೆಯಾಗುವ ಸಂಭವ ವಿದ್ದು, ಇದಕ್ಕೆ ಪರಿಹಾರವಾಗಿ ಸರಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಿಂದ ಅನುಮತಿಯನ್ನು ಪಡೆದು ಬಂದರೆ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯಲ್ಲಿ ಉಚಿತ ಹೆರಿಗೆ ಸೌಲಭ್ಯ ನೀಡುವುದಾಗಿ ಆಸ್ಪತ್ರೆ ಪ್ರಕಟಿಸಿದೆ . .ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವಿ. ಹೆಗ್ಗಡೆಯವರು ಗರ್ಭಿಣಿ ಸ್ತ್ರೀಯರ ಹೆರಿಗೆಗೆ ಅನಾನುಕೂಲ ಆಗಬಾರದೆಂಬ ಉದ್ದೇಶದಿಂದ ಈ ಯೋಜನೆಯನ್ನು ರೂಪಿಸಿದ್ದು, ತಾಲೂಕಿನ ವಿವಿಧ ಗ್ರಾಮಗಳ ಗರ್ಭಿಣಿ ಸ್ತ್ರೀಯರು ಈ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.






