ಬೆಳ್ತಂಗಡಿ: ಜಲ ಜೀವನ್ ಮಿಷನ್ ಅಡಿಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಒಟ್ಟು ಸುಮಾರು 12 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಟ್ಯಾಂಕ್ಗಳು ಹಾಗೂ ನೀರು ಸರಬರಾಜಿಗೆ ಸಂಬಂಧಪಟ್ಟ ಪೈಪ್ಲೈನ್ ಗಳನ್ನು ಅಳವಡಿಸುವ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಹೇಳಿದರು. ಅವರು ಜೂನ್ 1ರಂದು ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂಟಿನಿ ಎಂಬಲ್ಲಿ ಜಲಜೀವನ ಮಿಷನ್ ಅಡಿಯಲ್ಲಿ ಅಂದಾಜು 30ಲಕ್ಷ ರೂಪಾಯಿ ವೆಚ್ಚದ ನೂತನ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ನರೇಂದ್ರ ಮೋದಿ ಸರ್ಕಾರ ಕೊಟ್ಟಿರತಕ್ಕಂತಹ ಕೇಂದ್ರ ಸರ್ಕಾರದ ಜಲ ಜೀವನ ಮಿಷನ್ ಅಡಿಯಲ್ಲಿ ಈ ಯೋಜನೆ ಅನುಷ್ಠಾನ ಆಗುತಿದೆ. ನಾಗರಿಕರ ಬಹುದಿನಗಳ ಬೇಡಿಕೆಯಾದ ನಳ್ಳಿ ನೀರಿನ ಸರಬರಾಜು ಮಾಡಲು ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಲಾಯಿಲ ಗ್ರಾಮ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯೆ ಸೌಮ್ಯಲತಾ ಜಯಂತ ಗೌಡರ ಮನವಿ ಮೇರೆಗೆ ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಈ ಭಾಗದ ಜನರ ನೀರಿನ ಅವಶ್ಯಕತೆಗೆ ತುರ್ತು ಸಂದರ್ಭದಲ್ಲಿ ಟ್ಯಾಂಕ್ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಿ ಕೊರೊನಾ ಮಹಾಮಾರಿಯ ಸಂಕಷ್ಟದ ಸಮಯದಲ್ಲೂ ಕಾಮಗಾರಿಯನ್ನು ಅತ್ಯಂತ ಶೀಘ್ರವಾಗಿ ಪೂರ್ಣಗೊಳಿಸಿ ಈ ಭಾಗದ ಜನರ ನೀರಿನ ಸಮಸ್ಯೆಯನ್ನು ನೀಗಿಸಲಾಗುವುದು ಎಂದರು. ಅದಲ್ಲದೆ ಕಾಮಗಾರಿ ಸಂದರ್ಭದಲ್ಲಿ ಕಾಮಗಾರಿ ಕಳಪೆಯಾಗದಂತೆ ಗ್ರಾಮ ಪಂಚಾಯತ್ ಸದಸ್ಯರು ಗಮನ ಹರಿಸಿ ಉತ್ತಮ ಗುಣಮಟ್ಟದ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಸಹಕರಿಸಬೇಕು. ಎಂದರು. ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾ ಬೆನಡಿಕ್ಟ ಸಲ್ದಾನ, ಉಪಾಧ್ಯಕ್ಷ ಗಣೇಶ್, ಪಂಚಾಯತ್ ಸದಸ್ಯರುಗಳು, ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಶಿಧರ್ ಕಲ್ಮಂಜ, ಗಿರೀಶ್ ಡೋಂಗ್ರೆ, ಸುಧಾಕರ, ಲಾಯಿಲ ಪಂಚಾಯತ್ ಕಾರ್ಯದರ್ಶಿ ಪುಟ್ಟಸ್ವಾಮಿ, ಲೆಕ್ಕ ಸಹಾಯಕಿ ರೇಶ್ಮಾ ಗಂಜಿಗಟ್ಟಿ, ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ವೆಂಕಟಕೃಷ್ಣರಾಜ ಕಾರ್ಯಕ್ರಮ ನಿರ್ವಹಿಸಿದರು.






