ಬೆಳ್ತಂಗಡಿ: ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ಗುಲಾಮರಾಗಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಏಜೆಂಟ್ ಆಗಿರುವ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರಕಾರ ಮತ್ತೆ ಬಹುರಾಷ್ಟ್ರೀಯ ಕಂಪನಿಗಳಿಗೆ ರತ್ನಗಂಬಳಿ ಹಾಸುವ ಮೂಲಕ ಮತ್ತೆ ದೇಶವನ್ನು ಗುಲಾಮಗಿರಿಗೆ ತಳ್ಳುವ ಕ್ರಮ ಅತ್ಯಂತ ಅಪಾಯಕಾರಿಯಾಗಿದೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ರಾಜ್ಯ ಸಮಿತಿ ಸದಸ್ಯ ಶೇಖರ್ ಲಾಯಿಲ ಆರೋಪಿಸಿದರು.ಅವರು ಆಗಸ್ಟ್ 9ರಂದು ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಸಿಐಟಿಯು ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ‘ಕಾರ್ಪೊರೇಟ್ ಕಂಪೆನಿಗಳೇ ಭಾರತ ಬಿಟ್ಟು ತೊಲಗಿ’ ಎಂಬ ಘೋಷಣೆಯಡಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.1942ರಲ್ಲಿ ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂಬ ಕ್ವಿಟ್ ಇಂಡಿಯಾ ಚಳವಳಿ ನಡೆಸಿದಾಗ ಬ್ರಿಟಿಷರ ಏಜೆಂಟ್ ಆಗಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನೇತೃತ್ವದಲ್ಲಿ ಇಂದು ದೇಶವನ್ನು ಬಿಜೆಪಿ ಆಳುತ್ತಿದ್ದು , ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷಗಳ ಬಳಿಕ ದೇಶದ ಸಂಪತ್ತನ್ನು ಕೊಳ್ಳೆ ಹೊಡೆಯಲು ಸಾಮ್ರಾಜ್ಯಶಾಹಿ ಕಾರ್ಪೊರೇಟ್ ಕಂಪನಿಗಳಿಗೆ ಅವಕಾಶ ನೀಡುವ ಮೂಲಕ ರೈತ ಹಾಗೂ ಕಾರ್ಮಿಕ ಪರವಾದ ಕಾನೂನುಗಳನ್ನು ಕಾರ್ಪೊರೇಟ್ ಕಂಪನಿಗಳ ಪರವಾಗಿ ಬದಲಾಯಿಸಲಾಗುತ್ತಿದೆ ಎಂದು ಆರೋಪಿಸಿದರು.ಸಿಐಟಿಯು ತಾಲೂಕು ಅಧ್ಯಕ್ಷ ಶಿವಕುಮಾರ್ ಎಸ್. ಎಂ. ಮಾತನಾಡಿ, ದೇಶವನ್ನು ಆಳುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರಗಳು ಕಾರ್ಪೊರೇಟ್ ಕಂಪನಿಗಳ ಗುಲಾಮಗಿರಿಗೆ ಒಳಗಾಗಿದೆ ಎಂದು ಆರೋಪಿಸಿದರಲ್ಲದೇ; ಕಾರ್ಪೊರೇಟ್ ಕಂಪನಿಗಳಿಗಾಗಿ ದೇಶದ ಸಾರ್ವಜನಿಕ ಸಂಸ್ಥೆಗಳನ್ನು ಖಾಸಗಿ ಕಂಪೆನಿಗಳ ಎಂಜಲು ಕಾಸಿಗಾಗಿ ಮಾರಾಟ ಮಾಡುವ ಮೂಲಕ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಗುಲಾಮಗಿರಿಗೆ ಒಳಗಾಗುವ ಮೂಲಕ ದೇಶದ 139 ಕೋಟಿ ಜನರನ್ನು ಗುಲಾಮಗಿರಿಗೆ ತಳ್ಳಿದೆ ಎಂದು ಆರೋಪಿಸಿದರು.ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಜಿಲ್ಲಾ ಒಕ್ಕೂಟದ ಜಿಲ್ಲಾಧ್ಯಕ್ಷ ಸುರೇಶ್ ಭಟ್ ಕೊಜಂಬೆ ಮಾತನಾಡಿ, ದೇಶದ ಅನ್ನದಾತ ರೈತರು ಕಳೆದ ನವೆಂಬರ್ ತಿಂಗಳಿಂದ ದೆಹಲಿಯಲ್ಲಿ ಬಿಸಿಲು, ಗಾಳಿ, ಮಳೆಯನ್ನೇ ಲೆಕ್ಕಿಸದೆ ಪ್ರತಿಭಟನೆ ನಡೆಸುತ್ತಿದ್ದರೂ ಮೌನ ವಹಿಸಿರುವ ಪ್ರಧಾನಿ ನರೇಂದ್ರ ಮೋದಿಯವರ ಕ್ರಮ ಸರ್ವಾಧಿಕಾರಿಯಾದುದು. ದೇಶದ ಸಾರ್ವಜನಿಕ ಕಂಪನಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿದಲ್ಲದೇ, ಲಾಭದಾಯಕ ರಾಷ್ಟ್ರೀಕೃತ ಬ್ಯಾಂಕುಗಳನ್ನು ನಷ್ಟದಲ್ಲಿರುವ ಬ್ಯಾಂಕುಗಳ ಜೊತೆಗೆ ವಿಲೀನ ಮಾಡುವ ಮೂಲಕ ರಾಷ್ಟ್ರೀಕೃತ ಬ್ಯಾಂಕುಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲು ಮುಂದಾಗಿದೆ. ಇದರ ವಿರುದ್ಧ ಸಂಘಟಿತ ಹೋರಾಟ ಅಗತ್ಯವಿದೆ ಎಂದರು.ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಪ್ರಧಾನ ಕಾರ್ಯದರ್ಶಿ ವಸಂತ ನಡ, ದೇಶದ ಸಂಪತ್ತನ್ನು ಲೂಟಿ ಮಾಡುತ್ತಿರುವ ಕಾರ್ಪೊರೇಟ್ ಕಂಪನಿಗಳ ವಿರುದ್ಧ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ- ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧದ ಹೋರಾಟ ನಮ್ಮ ಹಕ್ಕುಗಳ ಉಳಿವಿಗಾಗಿ ನಡೆಸುವ ಐತಿಹಾಸಿಕ ಹೋರಾಟ ಎಂದರು.ಹೋರಾಟದ ನೇತೃತ್ವವನ್ನು ಕರ್ನಾಟಕ ಪ್ರಾಂತ ರೈತ ಸಂಘದ ನೀಲೇಶ್ ಹೆಚ್. ಪೆರಿಂಜೆ, ಅಜಿ ಜೋಸೆಫ್ , ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಕಾರ್ಯದರ್ಶಿ ಜಯಾನಂದ ಪಿಲಿಕಲ, ಸಿಐಟಿಯು ಮುಖಂಡರು ಹಾಗೂ ನಿವೃತ್ತ ಮೆಸ್ಕಾಂ ಜೂನಿಯರ್ ಇಂಜಿನಿಯರ್ ಜೆರಿ ಪತ್ರಾವೋ, ಅಕ್ಷರ ದಾಸೋಹ ನೌಕರರ ಸಂಘದ ಅಧ್ಯಕ್ಷೆ ಲಲಿತಾ ಮದ್ದಡ್ಕ, ಶ್ರಮಶಕ್ತಿ ಸ್ವಸಹಾಯ ಗುಂಪಿನ ಸಂಯೋಜಕ ಸಂಜೀವ ಆರ್. ಅತ್ತಾಜೆ ವಹಿಸಿದ್ದರು.ಬೆಳ್ತಂಗಡಿ ತಹಶೀಲ್ದಾರ್ ಮಹೇಶ್ ಜೆ ಮೂಲಕ ಮನವಿ ಸಲ್ಲಿಸಲಾಯಿತು






