ಬೆಳ್ತಂಗಡಿ: ಬೆಳ್ತಂಗಡಿಯ ಲಾಯ್ಲ ಪ್ರಸನ್ನ ಪದವಿಪೂರ್ವ ಕಾಲೇಜು ಹಾಗೂ 14 ಕಾಲೇಜುಗಳನ್ನು ಹೊಂದಿರುವ ಎ.ಎ. ಅಕಾಡೆಮಿಯ ಸಹಯೋಗದಲ್ಲಿ ಶಿಕ್ಷಕ-ರಕ್ಷಕ ಸಭೆ ಹಾಗೂ ವಿದ್ಯಾರ್ಥಿಗಳ ಫ್ರೆಶರ್ಸ್ ಡೇ ಕಾರ್ಯಕ್ರಮ ಆಗಸ್ಟ್ 28ರಂದು ಪ್ರಸನ್ನ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು.ಪ್ರಸನ್ನ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ. ಗಂಗಾಧರ ಗೌಡ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿ, ಆಧುನಿಕ ಸ್ಪರ್ಧಾತ್ಮಕ ಶಿಕ್ಷಣದ ಕುರಿತು ಹಾಗೂ ಶಿಕ್ಷಕ-ರಕ್ಷಕ ಸಭೆಯ ಮಹತ್ವದ ಕುರಿತು ಮಾಹಿತಿ ನೀಡಿದರು. ಕಾಲೇಜಿನ ಆಡಳಿತಾಧಿಕಾರಿ ಕೃಪಾ ಮಾತನಾಡಿ, ಶಿಕ್ಷಣ ಸಂಸ್ಥೆಯಲ್ಲಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ನೀಟ್, ಸಿಇಟಿ ಬಗ್ಗೆ ಮಾಹಿತಿ ನೀಡಿದರು.ವೇದಿಕೆಯಲ್ಲಿ ಎ.ಎ. ಅಕಾಡೆಮಿಯ ನಿರ್ದೇಶಕ ಅಣ್ಣೇಶ್, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಸುಮಲತಾ ಉಪಸ್ಥಿತರಿದ್ದರು. ವಿದ್ಯಾರ್ಥಿ ಹಾಗೂ ಪೋಷಕರಿಗೆ ವಿವಿಧ ಕ್ರೀಡೆಗಳನ್ನು ಏರ್ಪಡಿಸಲಾಗಿತ್ತು. ಸಭೆಯ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿನಿ ರಹಿಯಾನ ಸ್ವಾಗತಿಸಿದರು. ಯಶಸ್ವಿನಿ ಕಾರ್ಯಕ್ರಮ ನಿರೂಪಿಸಿ, ಅಂಕಿತಾ ವಂದಿಸಿದರು.






